


ಶಿವಮೊಗ್ಗ :ಉಗ್ರರು ನಡೆಸಿದಂತ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವನ್ನಪ್ಪಿದ್ದರು. ಈ ಹಿನ್ನಲೆಯನ್ನು ಖಂಡಿಸಿ ನಾಳೆ ಶಿವಮೊಗ್ಗ ಬಂದ್ ಗೆ ಕರೆ ನೀಡಲಾಗಿದೆ.ಈ ಕುರಿತಂತೆ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದಂತ ಶಾಸಕ ಎಸ್.ಎನ್ ಚನ್ನಬಸಪ್ಪ ಅವರು, ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದಂತ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಸಾವನ್ನಪ್ಪಿದ್ದಾರೆ.ಅವರ ಮೃತದೇಹ ಗುರುವಾರ ಬೆಳಿಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದೆ ಎಂದರು.

ಗುರುವಾರ ಬೆಳಿಗ್ಗೆ 9 ಗಂಟೆಯ ವೇಳೆಗೆ ಮಂಜುನಾಥ್ ಮೃತದೇಹ ಶಿವಮೊಗ್ಗ ತಲುಪಲಿದೆ. ಮಧ್ಯಾಹ್ನ 12.30ರವರೆಗೆ ಮನೆಯ ಬಳಿಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಮರೆವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ ಎಂದರು. ಈ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್ ಮಾಡಲು ವರ್ತಕರು ನಿರ್ಧರಿಸಿದ್ದಾರೆ. ನಾಳೆ ಶಿವಮೊಗ್ಗ ಅರ್ಧ ದಿನ ಬಂದ್ ಆಗಲಿದೆ ಎಂದರು.
